ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಿ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ
ನಗರದ ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆ ಸಂಬಂಧ ಪ್ರಿಸೈಡಿಂಗ್ ಮತ್ತು ಪೋಲಿಂಗ್ ಅಧಿಕಾರಿಗಳು ಹಾಗೂ ಪಿಡಿಒಗಳಿಗೆ ಶನಿವಾರ ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸುಗಮ ಹಾಗೂ ಸುವ್ಯವಸ್ಥಿತವಾಗಿ ಚುನಾವಣೆ ನಡೆಸಲು ಅಗತ್ಯ ಕ್ರಮವಹಿಸಬೇಕು. ಚುನಾವಣೆಯಲ್ಲಿ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ, ನಗರಸಭೆ ಹಾಗೂ ಪಟ್ಟಣ ಪಂಚಾಯತ್ಗಳ ಸದಸ್ಯರು, ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಮತ ಹಕ್ಕು ಚಲಾಯಿಸಲಿದ್ದಾರೆ ಎಂದರು.
ಮತದಾರರಿಗೆ ಮತದಾನ ಮಾಡುವ ಬಗ್ಗೆ ಜಾಗೃತಿಯನ್ನು ಸಂಬಂಧಪಟ್ಟ ಪಿಡಿಒಗಳು, ಕಾರ್ಯದರ್ಶಿಗಳು ಕಡ್ಡಾಯವಾಗಿ ನೀಡಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಚುನಾವಣೆಯ ಮತದಾನವೂ ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದ್ದು, ಈ ಚುನಾವಣಾ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದರು.
ಚುನಾವಣೆ ಪ್ರಕ್ರಿಯೆ ಬಗ್ಗೆ ಯಾವುದಾದರೂ ಗೊಂದಲಗಳಿದ್ದಲ್ಲಿ, ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಮತದಾನದ ಗೌಪ್ಯತೆಯನ್ನು ಕಾಪಾಡಿ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
‘ಕೊಡಗು ಜಿಲ್ಲೆಯಲ್ಲಿ 103 ಗ್ರಾಮ ಪಂಚಾಯಿತಿ ಕಚೇೀರಿಗಳು (ಪೊನ್ನಂಪೇಟೆ ಗ್ರಾ.ಪಂ.ಹೊರತುಪಡಿಸಿ) ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಕಚೇರಿ, ಮಡಿಕೇರಿ ನಗರಸಭೆ ಕಾವೇರಿ ಕಲಾಕ್ಷೇತ್ರ, ಪಟ್ಟಣ ಪಂಚಾಯಿತಿ, ಕುಶಾಲನಗರ, ಸೋಮವಾರಪೇಟೆ ಮತ್ತು ವಿರಾಜಪೇಟೆ ಇಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.’
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾತನಾಡಿ ಮತದಾನ ಮಾಡುವ ವಿಧಾನ, ಪರಿಶೀಲನೆ, ಪ್ರಾಶಸ್ತ್ಯ ಕ್ರಮಸಂಖ್ಯೆ ಬರೆಯುವ ಬಗ್ಗೆ ಮಾಹಿತಿ ನೀಡಿದರು.
ಮತ ಚಲಾಯಿಸುವವರು ಮತಗಟ್ಟೆಯಲ್ಲಿ ನೀಡುವ ನೇರಳ ಬಣ್ಣದ ಮಾರ್ಕರ್ ಪೆನ್ನಿನ ಮೂಲಕವೇ ಮತಹಕ್ಕು ಚಲಾಯಿಸಬೇಕು ಎಂದು ಅವರು ತಿಳಿಸಿದರು.
ಮತದಾರರು ಅನಕ್ಷರಸ್ಥರು, ಅಂಗ ನ್ಯೂನ್ಯತೆ, ದುರ್ಬಲರಾಗಿದ್ದವರಿಗೆ 18 ವರ್ಷ ಮೇಲ್ಪಟ್ಟ ವ್ಯಕ್ತಿಯ ಸಹಾಯ ಪಡೆಯಬಹುದು. ಮತದಾರರಿಗೆ ನೆರವಾಗುವ ಸಂಬಂಧಪಟ್ಟ ಜೊತೆಗಾರರು ಇನ್ನೊಬ್ಬ ಸದಸ್ಯರಿಗೆ ಅಥವಾ ಮತದಾರರಿಗೆ ಜೊತೆಗಾರರಾಗಬಾರದು ಎಂದು ಹೆಚ್ಚುವರಿ ಜಿಲ್ಲಾಧಕಾರಿ ರಾಜು ಮೊಗವೀರ ವಿವರಿಸಿದರು.
ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು ಮತದಾನದ ಹಿಂದಿನ ದಿನ, ತಮಗೆ ತಿಳಿಸಿದ ಸ್ಥಳ ಮತ್ತು ಸಮಯದಲ್ಲಿ ಹಾಜರಿರಬೇಕು. ಚುನಾವಣಾ ಸಾಮಾಗ್ರಿಗಳ ಪರಿಶೀಲನೆ ಪಟ್ಟಿಯಂತೆ ಸಾಮಾಗ್ರಿಗಳನ್ನು ಪಡೆದುಕೊಳ್ಳಬೇಕು. ತಮಗೆ ನೀಡಿರುವ ಮತದಾರರ ಪಟ್ಟಿ, ಮತಪತ್ರಗಳು ತಮ್ಮ ಕ್ಷೇತ್ರಕ್ಕೆ ಸಂಬಂಧಪಟ್ಟದೆಂದು ಪರಿಶೀಲಿಸಿಕೊಳ್ಳಬೇಕು. ಜೊತೆಗೆ ಪ್ರತಿಯೊಂದು ಮತಪತ್ರಗಳನ್ನು ಮತ್ತು ಅನುಕ್ರಮ ಸಂಖ್ಯೆಗಳನ್ನು ಪರಿಶೀಲಿಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಚುನಾವಣಾ ತರಬೇತಿದಾರರು ಹಾಗೂ ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ ಅವರು ವಿಧಾನ ಪರಿಷತ್ ಚುನಾವಣೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಚುನಾವಣೆ ಪೂರ್ವ ಸಿದ್ದತೆ, ಚುನಾವಣಾ ದಿನ ತೆಗೆದುಕೊಳ್ಳಬೇಕಾದ ಕಾರ್ಯಗಳು, ಮತದಾನ ಮುಗಿದ ನಂತರ ಕಾಗದಪತ್ರ, ಮತ ಪೆಟ್ಟಿಗೆ, ಮೊಹರು ಇತರೆ ಚುನಾವಣಾ ನಂತರದ ಪ್ರಕ್ರಿಯೆ ಮತ್ತು ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಮತಗಟ್ಟೆಗಳಿಗೆ ನಿಯೋಜನೆಗೊಂಡ ಅಧಿಕಾರಿಗಳು ಮತದಾನ ಪ್ರಕ್ರಿಯೆಗೆ ಬೇಕಾದ ಚುನಾವಣಾ ಸಾಮಾಗ್ರಿಗಳನ್ನು ಪರಿಶೀಲಿಸಿ ಪಡೆದುಕೊಳ್ಳಬೇಕು. ಮಸ್ಟರಿಂಗ್ ಮತ್ತು ‘ಡಿ’ ಮಸ್ಟರಿಂಗ್ ಸಮಯದಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು ನೀಡಿದರು.
ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್, ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇತರರು ಇದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network