Header Ads Widget

Responsive Advertisement

ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಡೆದ ರಸ್ತೆ ಸುರಕ್ಷತಾ ಸಭೆ

ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಡೆದ ರಸ್ತೆ ಸುರಕ್ಷತಾ ಸಭೆ


ಮಡಿಕೇರಿ ಫೆ.21: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಭೆಯು ನಗರದ ಹೊರ ವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. 

ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಹೆಚ್ಚಿನ ಅರಿವು ಮೂಡಿಸುವುದರ ಜೊತೆಗೆ, ಅಗತ್ಯವಿರುವ ಕಡೆ ರಸ್ತೆ ಸುರಕ್ಷತಾ ಮಾಹಿತಿಯ ಫಲಕ ಅಳವಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ರಸ್ತೆ ಸುರಕ್ಷತೆ ಸಂಬಂಧ ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಅಗತ್ಯ ಇರುವ ಕಡೆಗಳಲ್ಲಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. 

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಹೊಸೂರು ರಮೇಶ್ ಜೋಯಪ್ಪ ಅವರು ಮಾತನಾಡಿ ರಾಜಸೀಟು ಬಳಿ ವಾರಾಂತ್ಯದಲ್ಲಿ ಖಾಸಗಿ ಬಸ್‍ಗಳ ಸಂಚಾರಕ್ಕೆ ತುಂಬಾ ತೊಡಕಾಗುತ್ತದೆ. ಆದ್ದರಿಂದ ರಾಜಸೀಟು ಬಳಿ ಪಾರ್ಕಿಂಗ್‍ಗೆ ಅವಕಾಶ ಮಾಡಬಾರದು ಎಂದು ಸಲಹೆ ಮಾಡಿದರು. 

ರಾಜ್ ದರ್ಶನ್ ಹೋಟೆಲ್ ಬಳಿಯಿಂದ ಕುಂದುರುಮೊಟ್ಟೆ ದೇವಸ್ಥಾನದವರೆಗೆ ಪ್ರವಾಸಿ ವಾಹನಗಳ ನಿಲುಗಡೆಗೆ ಅವಕಾಶ ಮಾಡಬಾರದು ಎಂದು ರಮೇಶ್ ಜೋಯಪ್ಪ ಅವರು ಕೋರಿದರು. 

ಗೋಣಿಕೊಪ್ಪ-ಮೈಸೂರು ರಸ್ತೆಯ ಚೆನ್ನಂಗಿ ಹಳ್ಳ ಬಳಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಈ ಪ್ರದೇಶದಲ್ಲಿ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಸಾರ್ವಜನಿಕರೊಬ್ಬರು ಮನವಿ ಮಾಡಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಎಲ್ಲೆಲ್ಲಿ ಅವಶ್ಯವಿದೆ ಅಂತಹ ಕಡೆಗಳಲ್ಲಿ ಸೂಚನಾ ಫಲಕ ಜೊತೆಗೆ, ಸಿಸಿಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. 

ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಮೇದಪ್ಪ ಅವರು ಮಾತನಾಡಿ ಮಡಿಕೇರಿ-ಮೈಸೂರು ರಸ್ತೆಯ ಚೈನ್‍ಗೇಟ್ ಬಳಿ ಬ್ಯಾರಿಕೇಡ್ ನಿರ್ಮಾಣ ಮಾಡಬೇಕಿದೆ. ನಿಧಾನಗತಿಯಲ್ಲಿ ಚಲಿಸಿ ಎಂಬ ಸೂಚನಾ ಫಲಕ ಅಳವಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

ನೆಲ್ಲಿಹುದಿಕೇರಿಯಲ್ಲಿ ಎರಡು ಬದಿಯೂ ವಾಹನ ನಿಲುಗಡೆ ಮಾಡುತ್ತಿದ್ದು, ಒಂದು ಕಡೆ ಮಾತ್ರ ವಾಹನ ನಿಲುಗಡೆಗೆ ಸ್ಥಳಾವಕಾಶ ಮಾಡಬೇಕು ಎಂದು ಸಾರ್ವಜನಿಕರೊಬ್ಬರು ಕೋರಿದರು. 

ಗೋಣಿಕೊಪ್ಪದ ಪೊನ್ನಂಪೇಟೆಗೆ ಹೋಗುವ ಮಾರ್ಗದ ಜಂಕ್ಷನ್‍ನಲ್ಲಿ ವಾಹನ ನಿಲುಗಡೆಯಿಂದ ತುಂಬಾ ಕಿರಿಕಿರಿ ಉಂಟಾಗುತ್ತದೆ. ಆದ್ದರಿಂದ 60 ಮೀಟರ್ ದೂರದಲ್ಲಿ ವಾಹನಗಳನ್ನು ನಿಲುಗಡೆ ಮಾಡುವುದು ಒಳ್ಳೆಯದು ಎಂದು ಸಾರ್ವಜನಿಕರೊಬ್ಬರು ಗಮನ ಸೆಳೆದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಇನ್ಸೆಪೆಕ್ಟರ್ ರಾಮಚಂದ್ರ, ರೀಟಾ ಇತರರು ಇದ್ದರು.  

ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ರಮೇಶ್ ಜೋಯಪ್ಪ ಇತರರು ಇದ್ದರು. 

ಜಿಲ್ಲೆಯಾದ್ಯಂತ ಕೆಎಸ್‍ಆರ್‍ಟಿಸಿ ಬಸ್ ಸಂಚರಿಸಲು ಅವಕಾಶ ಮಾಡಬೇಕು ಎಂದು ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಕೆಎಸ್‍ಆರ್‍ಟಿಸಿ ಪರವಾಗಿ ನ್ಯಾಯವಾದಿ ವೆಂಕಟರಮಣಪ್ಪ, ಹಾಗೂ ಖಾಸಗಿ ಬಸ್ ಮಾಲೀಕರ ಪರವಾಗಿ ನ್ಯಾಯವಾದಿ ನಾಗೇಶ್ ಅವರು ಬಸ್ ಸಂಚಾರ ಸಂಬಂಧ ವಿಷಯ ಮಂಡಿಸಿದರು.  

ಈ ಬಗ್ಗೆ ಎರಡು ಕಡೆಯಿಂದ ವಾದ ಆಲಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ‘ಗ್ರಾಮ ವಾಸ್ತವ್ಯ’ ಸಂದರ್ಭದಲ್ಲಿ ಅಗತ್ಯ ಬಸ್ ಸೇವೆ ಕಲ್ಪಿಸುವಂತೆ ಸಾರ್ವಜನಿಕರು ಮನವಿ ಮಾಡುತ್ತಾರೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆದ್ಯತೆ ಮೇಲೆ ಕರ್ತವ್ಯ ನಿರ್ವಹಿಸುವುದು ಅಗತ್ಯವಾಗಿದೆ ಎಂದರು. 

ಸದ್ಯ ಜಿಲ್ಲೆಯಾದ್ಯಂತ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಸಂಬಂಧ ಮುಂದಿನ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಆರ್‍ಟಿಒ ಕಚೇರಿ ಇನ್ಸ್‍ಪೆಕ್ಟರ್ ರಾಮಚಂದ್ರ, ರೀಟಾ ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,