Header Ads Widget

Responsive Advertisement

ಸರ್ಕಾರಿ ನೌಕರರ ಜಿಲ್ಲಾ ಕ್ರೀಡಾಕೂಟಕ್ಕೆ ಚಾಲನೆ

ಸರ್ಕಾರಿ ನೌಕರರ ಜಿಲ್ಲಾ ಕ್ರೀಡಾಕೂಟಕ್ಕೆ ಚಾಲನೆ

ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ: ಅಪ್ಪಚ್ಚು ರಂಜನ್


ಮಡಿಕೇರಿ ಮಾ.12; ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಜಾಗ ಗುರುತಿಸಿದಲ್ಲಿ, ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದ್ದಾರೆ.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಲ್ಲಿ ಉತ್ತಮ ಬಾಂಧವ್ಯ ಇದ್ದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಬಹುದು. ಆ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳಿಂದ ಕೆಲಸ ಮಾಡಿಸುವ ಕರಗತ ಇರಬೇಕು ಎಂದರು. 

ನೌಕರರು ಪ್ರತೀ ನಿತ್ಯ ಒಂದಲ್ಲ ಒಂದು ಜಂಜಾಟದಿಂದ ಕರ್ತವ್ಯ ನಿರ್ವಹಿಸುತ್ತಾರೆ. ಈ ಒತ್ತಡ ಮತ್ತು ಜಂಜಾಟದಿಂದ ಹೊರ ಬಂದು ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಒತ್ತಡದಿಂದ ನಿವಾರಣೆಯಾಗಬೇಕು ಎಂದು ಶಾಸಕರು ಹೇಳಿದರು. 

ಯಾವುದೇ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿದಾಗ ಹಲವು ಜಟಿಲ ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದು. ಮನೆ ಕೆಲಸವನ್ನು ಮನೆಗೆ ಬಿಟ್ಟು, ಕಚೇರಿ ಕೆಲಸವನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಅಪ್ಪಚ್ಚು ರಂಜನ್ ಅವರು ಸಲಹೆ ಮಾಡಿದರು. 

ಜಿಲ್ಲೆಯಲ್ಲಿ ಕ್ರೀಡಾ ವಿವಿ ಸ್ಥಾಪನೆಗೆ ಪ್ರಯತ್ನಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ರೀಡಾ ವಿವಿ ಆರಂಭವಾಗುವ ಸಾಧ್ಯತೆ ಇದೆ ಎಂದರು. 

ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಸಮಿತಿ ಅಧ್ಯಕ್ಷರಾದ ರವಿಕುಶಾಲಪ್ಪ ಅವರು ಮಾತನಾಡಿ ಸರ್ಕಾರಿ ನೌಕರರು ಪ್ರಾಕೃತಿಕ ವಿಕೋಪ ಮತ್ತು ಕೋವಿಡ್-19 ಸಂದರ್ಭದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಸರ್ಕಾರಿ ನೌಕರರು ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡದ ಬದುಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಈ ಒತ್ತಡದಿಂದ ದೂರವಿರಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಸಹಕಾರಿಯಾಗಿದೆ ಎಂದರು.

ಜಿಲ್ಲೆಯಲ್ಲಿ ರೈತರ, ಕಾರ್ಮಿಕರ, ಆದಿವಾಸಿಗಳ ಬದುಕು ಹಸನಾಗಲು ಸರ್ಕಾರಿ ನೌಕರ ಕರ್ತವ್ಯ ಪ್ರಜ್ಞೆ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಬಡವರು, ನಿರ್ಗತಿಕರಿಗೆ ಸ್ಪಂದಿಸಿ ಕೆಲಸ ಮಾಡಿಕೊಡಬೇಕು ಎಂದರು. 

ಆಟೋಟದಲ್ಲಿ ಪಾಲ್ಗೊಳ್ಳುವುದರಿಂದ ಮನೋಲ್ಲಾಸ ಉಂಟಾಗಿ, ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ರವಿಕುಶಾಲಪ್ಪ ಅವರು ಅಭಿಪ್ರಾಯಪಟ್ಟರು. 

ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರದಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದು ರವಿಕುಶಾಲಪ್ಪ ಅವರು ಆಶಿಸಿದರು. 

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ ಕೇಂದ್ರದ ಸರ್ಕಾರಿ ನೌಕರರಿಗೆ ದೊರೆಯುವ ವೇತನ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಹ ಸಮಾನ ವೇತನ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಡಿಸೆಂಬರ್ ಅಂತ್ಯದೊಳಗೆ ಜಾರಿಯಾಗಬಹುದು ಎಂದು ಹೇಳಿದರು. 

ಹೊಸ ಪಿಂಚಣಿ ಯೋಜನೆ ಬದಲಾಗಿ, ಹಳೆ ಪಿಂಚಣಿ ಯೋಜನೆಯನ್ನು ಮುಂದುವರೆಸಬೇಕು. ಆ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಷಡಾಕ್ಷರಿ ಅವರು ತಿಳಿಸಿದರು.  

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಆ ನಿಟ್ಟಿನಲ್ಲಿ ವಿಧಾನಸಭಾ ಅಧಿವೇಶನದಲ್ಲೂ ಸಹ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೇತನ ಹೆಚ್ಚಳ ಸಂಬಂಧ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಷಡಾಕ್ಷರಿ ಅವರು ಹೇಳಿದರು.  

ಸರ್ಕಾರಿ ನೌಕರರ ಹಿತದೃಷ್ಟಿ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಹಲವು ಪ್ರಯತ್ನ ಮಾಡಲಾಗಿದೆ ಎಂದರು. 

ಸಮಾಜವನ್ನು ಸುಧಾರಣೆ ಮತ್ತು ಬದಲಾವಣೆ ಮಾಡುವಲ್ಲಿ ಸರ್ಕಾರಿ ನೌಕರರ ಪಾತ್ರ ಹೆಚ್ಚಿನದ್ದಾಗಿದೆ. ಕೋವಿಡ್-19 ಸಂದರ್ಭದಲ್ಲಿ ಸರ್ಕಾರಿ ನೌಕರರು ಜೀವದ ಹಂಗನ್ನು ತೊರೆದು ಕಾರ್ಯನಿರ್ವಹಿಸಿದ್ದಾರೆ. ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು. 

ರಾಜ್ಯವು ಅಭಿವೃದ್ಧಿಯಲ್ಲಿ 6 ನೇ ಸ್ಥಾನ ಹೊಂದಿದೆ. ಹಾಗೆಯೇ ಜಿಎಸ್‍ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಏಪ್ರಿಲ್ ತಿಂಗಳಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದೆ. ಕೊಡಗು ಜಿಲ್ಲೆ ಕ್ರೀಡೆಗೆ ಪ್ರಸಿದ್ಧಿಯಾಗಿದೆ. ಆ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಇನ್ನಷ್ಟು ಸಾಧನೆ ಮಾಡುವಂತಾಗಬೇಕು ಎಂದರು. 

ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಜಾಗ ಒದಗಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದರು. 

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ದೈಹಿಕ ಮತ್ತು ಮಾನಸಿಕವಾಗಿ ಸಮತೋಲನ ಹೊಂದಿದರೆ ಶ್ರದ್ಧೆಯಿಂದ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದರು. 

ಸರ್ಕಾರದ ಆಶೋತ್ತರಗಳಿಗೆ ಸ್ಪಂದಿಸಿ ನೌಕರರು ಕೆಲಸ ನಿರ್ವಹಿಸಬೇಕಿದೆ. ಪ್ರತೀ ನಿತ್ಯ ಕನಿಷ್ಠ ಅರ್ಧ ಗಂಟೆಯಾದರೂ ವ್ಯಾಯಾಮ, ನಡಿಗೆ, ಧ್ಯಾನ ಮಾಡುವಂತಾಗಬೇಕು. ಇದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು. 

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ಸರ್ಕಾರಿ ನೌಕರರ ಕಾರ್ಯದರ್ಶಿ ಅರುಣ್ ಕುಮಾರ್, ಖಜಾಂಚಿ ಪಿ.ಡಿ.ರಾಜೇಶ್, ರಾಜ್ಯ ಪರಿಷತ್ ಸದಸ್ಯರಾದ ಜನಾರ್ಧನ್, ಗೌರವಾಧ್ಯಕ್ಷರಾದ ಎಸ್.ಟಿ.ಶಮ್ಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಗುರುರಾಜ್ ಬಿ.ಎಸ್.(ವಿರಾಜಪೇಟೆ), ಪ್ರದೀಪ್(ಸೋಮವಾರಪೇಟೆ), ಕರ್ನಾಟಕ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಬಿ.ಜಿ.ಚಿಣ್ಣಪ್ಪ, ಉಪಾಧ್ಯಕ್ಷರಾದ ಚಿತ್ರಾವತಿ ಇತರರು ಇದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್ ಸ್ವಾಗತಿಸಿದರು, ವೈ.ಚಿತ್ರಾ ಮತ್ತು ತಂಡದವರು ಪ್ರಾರ್ಥಿಸಿದರು. ಅನಿತಾ ಮತ್ತು ವರದರಾಜು ನಿರೂಪಿಸಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,