Header Ads Widget

Responsive Advertisement

ಡಿಸಿ ಅವರ ಅಧ್ಯಕ್ಷತೆಯಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ


ಡಿಸಿ ಅವರ ಅಧ್ಯಕ್ಷತೆಯಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ

ಮಡಿಕೇರಿ ಆ.22: ಜನರಲ್ ತಿಮ್ಮಯ್ಯ ಸ್ಮಾರಕ ಭವನ ಕಾರ್ಯ ಚಟುವಟಿಕೆ ಸಂಬಂಧ ‘ಸ್ಮಾರಕ ಭವನ ನಿರ್ವಹಣಾ ಸಮಿತಿ’ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಸುತ್ತುಗೋಡೆ ನಿರ್ಮಾಣಕ್ಕೆ ಸರ್ಕಾರದಿಂದ 25 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.  

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಗೌರವಾನ್ವಿತ ರಾಷ್ಟ್ರಪತಿ ಅವರು ಆಗಮಿಸಿದ್ದ ಸಂದರ್ಭದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಸುಮಾರು 34 ಲಕ್ಷ ರೂ. ವೆಚ್ಚದ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದುವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಅವರು ಸಭೆಯ ಗಮನಕ್ಕೆ ತಂದರು.     

ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಸುತ್ತುಗೋಡೆ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಹಣ ಸಂಬಂಧಿಸಿದಂತೆ ಸರ್ಕಾರದ ನಿಯಮದಂತೆ ಕ್ರಮವಹಿಸಬೇಕಿದೆ. ಆದರೂ ಈ ಬಗ್ಗೆ ಇಲಾಖೆಗೆ ಪತ್ರ ಬರೆದು ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.  

ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಮುಖ್ಯರಸ್ತೆ ಬದಿ ವಾಹನ ನಿಲುಗಡೆ ಸಂಬಂಧ ನಗರಸಭೆ ವತಿಯಿಂದ ಟೆಂಡರ್ ಆಹ್ವಾನಿಸಿ, ವಾಹನ ನಿಲುಗಡೆ ಶುಲ್ಕದಲ್ಲಿ ಶೇ.25 ರಷ್ಟು ಹಣವನ್ನು ಜನರಲ್ ತಿಮ್ಮಯ್ಯ ಸ್ಮಾರಕ ಭವನ ಚಟುವಟಿಕೆಗೆ ಭರಿಸುವಂತೆ ನಗರಸಭೆ ಎಂಜಿನಿಯರ್‍ಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಈ ಬಗ್ಗೆ ಮಾತನಾಡಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಮುಖ್ಯರಸ್ತೆ ಬಳಿ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸೇರಿದ 6 ಅಡಿ ಅಷ್ಟು ಜಾಗವನ್ನು ಕಾಯ್ದಿರಿಸಿ, ತಡೆಗೋಡೆ ನಿರ್ಮಾಣ ಮಾಡಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು. 

ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಈಗಾಗಲೇ ಎರಡು ಬೋರ್‍ವೆಲ್‍ಗಳಿದ್ದು, ಒಂದು ಕಾರ್ಯನಿರ್ವಹಿಸುತ್ತಿದೆ. ಮತ್ತೊಂದು ದುರಸ್ತಿಯಾಗಿದೆ. ಬೇಸಿಗೆ ಅವಧಿಯಲ್ಲಿ ಉದ್ಯಾನವನಕ್ಕೆ ನೀರು ಪೂರೈಸುವುದು ಕಷ್ಟಸಾಧ್ಯವಾಗಿದೆ ಎಂದು ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಗೈಡ್ ಆಗಿ ಕಾರ್ಯನಿರ್ವಹಿಸುತ್ತಿರುವ ತಿಮ್ಮಯ್ಯ ಅವರು ಸಭೆಯ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರಸಭೆಯಿಂದ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಎಂಜಿನಿಯರ್‍ಗೆ ಸೂಚಿಸಿದರು. 

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ನಮೂನೆ-3 ನ್ನು ಕೂಡಲೇ ಒದಗಿಸುವಂತೆ ನಗರಸಭೆ ಎಂಜಿನಿಯರ್‍ಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. 

ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಧ್ವಜಸ್ತಂಭ ನಿರ್ಮಾಣ ಮಾಡುವಂತಾಗಬೇಕು ಎಂದು ಕಾರ್ಗಿಲ್ ವಿಜಯ್ ದಿವಸದಂದು ಮೇಜರ್ ಚಿಂಗಪ್ಪ ಅವರು ಮನವಿ ಮಾಡಿದ್ದು, ಈ ಬಗ್ಗೆ ಸೈನಿಕ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಮತ್ತು ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರು ಪರಿಶೀಲಿಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಸೈನಿಕ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಪ್ರತೀ ವರ್ಷ ಜುಲೈ, 26 ರಂದು ಕಾರ್ಗಿಲ್ ವಿಜಯ ದಿನ ಆಚರಿಸುವಂತೆ ಮನವಿ ಮಾಡಿದ್ದು ಈ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.  

      ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಉದ್ಯಾನವನವನ್ನು ಮತ್ತಷ್ಟು ಆಕರ್ಷಣೀಯಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಹೂವಿನ ಗಿಡಗಳನ್ನು ಬೆಳೆಸುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

      ಹುಲ್ಲು ಕತ್ತರಿಸುವ ಯಂತ್ರ ಸೇರಿದಂತೆ ಸ್ಮಾರಕ ಭವನಕ್ಕೆ ಬೇಕಿರುವ ಸಲಕರಣೆಗಳ ಖರೀದಿಗೆ ಜಿಲ್ಲಾಧಿಕಾರಿ ಅವರು ಅನುಮತಿ ನೀಡಿದರು.  

       ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜ್‍ಗೋಪಾಲ್, ಸೈನಿಕ ಕಲ್ಯಾಣ ಇಲಾಖೆಯ ಮೇಜರ್ ಬಾಲಸುಬ್ರಹಣ್ಯಂ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕರಾದ ಹರ್ಷ, ತಹಶೀಲ್ದಾರ್ ಪಿ.ಎಸ್.ಮಹೇಶ್, ನಗರಸಭೆ ಎಇಇ ಎಂ.ಎಸ್.ರಾಜೇಂದ್ರ ಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಅವರು ಹಲವು ಮಾಹಿತಿ ನೀಡಿದರು.  ಜಿಲ್ಲಾ ಉದ್ಯೋಗವಿನಿಯಮಾಧಿಕಾರಿ ಉಮಾ, ವಿದ್ಯಾರ್ಥಿನಿ ಮೋನಿಷಾ ಡಿ.ಆರ್. ಇತರರು ಇದ್ದರು.